ಪರೀಕ್ಷಾ ಅಕ್ರಮ: ಕೋಟೆಯಲ್ಲಿ ಜೆನ್‌ಝಿಗಳ ಪ್ರತಿಭಟನೆ

ಪರೀಕ್ಷಾ ಅಕ್ರಮ: ಕೋಟೆಯಲ್ಲಿ ಜೆನ್‌ಝಿಗಳ ಪ್ರತಿಭಟನೆ

ಬಾಗಲಕೋಟೆ: 
ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯಲ್ಲಿ ಉಂಟಾಗಿರುವ ಲೋಪಗಳಿಂದ ಸಮಸ್ಯೆಗೆ ಒಳಾಗಿರುವ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. 
ನಗರದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. 
ಕೆಪಿಎಸ್‌ಸಿಯಲ್ಲಿ ನಡೆದಿರುವ ಹಗರಣದ ಸಮಗ್ರ ತನಿಖೆಗೆ ರಾಜ್ಯ ಸರ್ಕಾರ ಮುಂದಾಗಬೇಕು, ಖಾಲಿ ಇರುವ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸರ್ಕಾರ ಮುಂದಾಗಬೇಕು. ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ೪೦೦ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬಯಲಾಗಿದೆ. ಒಂದು ಹುದ್ದೆಗೆ ಬರೊಬ್ಬರಿ ೮೦ ಲಕ್ಷ ರೂ.ಗಳವರೆಗೆ ಬೇಡಿಕೆ ಇಡಲಾಗಿದ್ದು, ಸರ್ಕಾರಿ ಹುದ್ದೆಯ ಕನಸು ಕಟ್ಟಿಕೊಂಡಿರುವ  ಅಭ್ಯರ್ಥಿಗಳಿಗೆ ಮೋಸ ಮಾಡಿದಂತೆ ಆಗುತ್ತದೆ. ಈ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಯಬೇಕೆಮದು ವಿದ್ಯಾರ್ಥಿಗಳು ಆಗ್ರಹಿಸಿದರು. 

ಆ.೩ರಂದು ಜರುಗಿದ ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಸಮಯಕ್ಕೆ ಸರಿಯಾಗಿ ಪ್ರಶ್ನೆ ಪತ್ರಿಕೆ ವಿತರಣೆ ಆಗಿಲ್ಲ. ಈ ಘಟನೆಯಿಂದ ಅನೇಕ ಅಭ್ಯರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ಸೂಕ್ತ ಕ್ರಮ ಕೈಗೊಂಡು ಅಭ್ಯರ್ಥಿಗಳಿಗೆ ನ್ಯಾಯ ನೀಡಬೇಕೆಂದು ಒತ್ತಾಯಿಸಿದರು. 
ಪ್ರಥಮೇಶ ವಾಘ್ಮೋಡೆ, ವಿಪುಲ ಪೇಟ್ಕರ್, ಸಂಜನಾ ಪಟ್ಟೇಗಾರ, ವಿವೇಕ ತಳವಾರ, ಸುದರ್ಶನ ಮತ್ತಿತರರು ನೇತೃತ್ವ ವಹಿಸಿದ್ದರು.